ಬಂಟ್ವಾಳ: ಸಜಿಪಮೂಡ ಗ್ರಾಮ ಪಂಚಾಯತಿಯಲ್ಲಿ ನಡೆದಿರುವ ಅವ್ಯವಹಾರ ಹಾಗೂ ಅಧಿಕಾರ ದುರುಪಯೋಗದ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸಜಿಪಮೂಡ ಗ್ರಾಮ ಸಮಿತಿ ವತಿಯಿಂದ ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಹಮೀದ್ ಕಾರಜೆ ಇವರ ಅಧ್ಯಕ್ಷತೆಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಎಸ್ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಬಶೀರ್ ಬೊಳ್ಳಾಯಿ ಅವರು, ‘ಕಳೆದ ಐದಾರು ವರ್ಷಗಳಿಂದ ಗ್ರಾಮಸ್ಥರು ಪಾವತಿಸಿದ ನಲ್ಲಿ ನೀರಿನ ಹಣವನ್ನು ದುರುಪಯೋಗಪಡಿಸಿ ಸುಮಾರು 10 ಲಕ್ಷಕ್ಕೂ ಅಧಿಕ ಹಣವನ್ನು ಪಂಚಾಯತ್ ಲೆಕ್ಕಪತ್ರಗಳಿಂದ ತಿರುಗಿಸಿ ಬಿಲ್ ವಸೂಲಿಗಾರರು ಸ್ವಂತ ಬಳಕೆಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಭ್ರಷ್ಟಾಚಾರ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಬದಲಾಗಿ ಅವರ ಅಮಾನತನ್ನು ರದ್ದುಪಡಿಸಿ ಮರುನೇಮಕ ಮಾಡಿರುವುದು ಅತ್ಯಂತ ಖಂಡನೀಯ ಸಾಮಾನ್ಯ ಸಭೆ ಹಾಗೂ ಗ್ರಾಮ ಸಭೆಯಲ್ಲಿ ಅಮಾನತು ಮಾಡಲು ನಿರ್ಣಯವನ್ನು ತೆಗೆದುಕೊಂಡಿದ್ದರು ಎಂದು ಅವರು ಹೇಳಿದರು.
ಇನ್ನೂ ಗ್ರಾಮಸ್ಥರ ಮತವನ್ನು ಪಡೆದು ಆಯ್ಕೆಯಾದ ಕೆಲವು ಪ್ರತಿನಿಧಿಗಳು ಭ್ರಷ್ಟಾಚಾರಿಯನ್ನು ಮತ್ತೆ ಕೆಲಸಕ್ಕೆ ಸೇರಿಸಲು ಸಹಿ ಸಂಗ್ರಹಣೆಯಲ್ಲಿ ತೊಡಗಿರುವುದು ನಾಚಿಕೆಗೇಡಿನ ಸಂಗತಿ. ಇದು ಭ್ರಷ್ಟಾಚಾರಕ್ಕೆ ಬೆಂಬಲ ನೀಡುವ ಕ್ರಮವಾಗಿದ್ದು, ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ತರುವಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರಕರಣದ ಕುರಿತು ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜೊತೆಗೆ ಸಾರ್ವಜನಿಕರ ಹಣವನ್ನು ದುರುಪಯೋಗಪಡಿಸಿದವರಿಗೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕು ಎಂದು ಅವರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕಾರ್ಯಕರ್ತರು ಹಿತೈಷಿಗಳು ಭಾಗವಹಿಸಿದರು.


