ಸುರತ್ಕಲ್: ರಾಷ್ಟ್ರೀಯ ಹೆದ್ದಾರಿಯ ತಡಂಬೈಲು ಸುಪ್ರೀಮ್ ಹಾಲ್ ಎದುರು ದ್ಚಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಮೃತರನ್ನು ಚೊಕ್ಕಬೆಟ್ಟು 8ನೇ ಬ್ಲಾಕ್ ನಿವಾಸಿ ಮುಹಮ್ಮದ್ ಅಖ್ತರ್ ಹುಸೈನ್( 25) ಗುರುತಿಸಲಾಗಿದೆ.

ಇವರು ಗಲ್ಪ್ ಉದ್ಯೋಗಿಯಾಗಿದ್ದು, ಶುಕ್ರವಾರ ಊರಿಗೆ ಮರಳಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಎರಡೂ ಬೈಕ್ ಗಳಲ್ಲಿದ್ದ ಮೂವರು ಗಾಯಗೊಂಡಿದ್ದು, ಎಲ್ಲರನ್ನೂ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಅಖ್ತರ್ ಹುಸೈನ್ ಮತ್ತು ಆತನ ಸ್ನೇಹಿತ ಮುಕ್ಕದಿಂದ ಚೊಕ್ಲಬೆಟ್ಟುಗೆ ರಾಷ್ಟ್ರೀಯ ಹೆದ್ದಾರಿಯಾಗಿ ತೆರಳುತ್ತಿದ್ದ ವೇಳೆ ಸುರತ್ಕಲ್ ನಿಂದ ಮುಂಚೂರು ಕಡೆಗೆ ತೆರಳುತ್ತಿದ್ದ ಇನ್ನೊಂದು ದ್ವಿಚಕ್ರ ವಾಹನದಲ್ಲಿದ್ದ ಸವಾರರು ಒಮ್ಮೆಲೇ ಮುಂಚೂರು ರಸ್ತೆಗೆ ತಿರುಗಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


