ವಿದ್ಯಾರ್ಥಿಗಳು ಜೀವನ ಮೌಲ್ಯ ಹಾಗೂ ನೈತಿಕತೆಯನ್ನು ಮೈಗೂಡಿಸಿಕೊಳ್ಳಬೇಕು-ಎಸ್.ಎಲ್. ಭೋಜೇಗೌಡ
ಬಂಟ್ವಾಳ: “ಶಿಕ್ಷಣ ಕ್ಷೇತ್ರವು ಇಂದಿನ ಆಧುನಿಕ ಯುಗದಲ್ಲಿ ಅತ್ಯಂತ ಮಹತ್ವದ ಬದಲಾವಣೆಗಳನ್ನು ಕಾಣುತ್ತಿದ್ದು, ವಿದ್ಯಾರ್ಥಿಗಳು ಕೇವಲ ಅಂಕಗಳಿಕೆಯ ಹಿಂದೆ ಬೀಳದೆ ಉತ್ತಮ ಮೌಲ್ಯಯುತ ಶಿಕ್ಷಣ ಹಾಗೂ ನೈತಿಕತೆಯನ್ನು ಮೈಗೂಡಿಸಬೇಕು. ಗ್ರಾಮೀಣ ಭಾಗದಲ್ಲೂ ಇಂದು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಶೈಕ್ಷಣಿಕ ಸಂಸ್ಥೆಗಳು ಇರುವುದು ಸಂತಸದ ವಿಚಾರ. ಇಂತಹ ಸಮಾವೇಶಗಳು ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಹೊಸ ಸ್ಪೂರ್ತಿಯನ್ನು ತುಂಬುತ್ತವೆ.” ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದರು.

ಬಂಟ್ವಾಳದ ಎಡ್ವೆಂಚರ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ದ.ಕ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ (ರಿ.) ಮಂಗಳೂರು ಹಾಗೂ ಎಡ್ವೆಂಚರ್ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಶೈಕ್ಷಣಿಕ ಸಮಾವೇಶ, ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಪ್ರಾಚಾರ್ಯರ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ದ.ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಡಾ. ನವೀನ್ ಶೆಟ್ಟಿ ಕೆ, “ಪ್ರಾಂಶುಪಾಲ ಬಂಧುಗಳು ಹಾಗೂ ಉಪನ್ಯಾಸಕ ಸಮುದಾಯದ ನಡುವೆ ಸ್ನೇಹ ಭಾಂದವ್ಯ ಇರಬೇಕು. ಶಿಕ್ಷಣದ ಅಭಿವೃದ್ಧಿಯ ದೃಷ್ಟಿಯಿಂದ ಸಂಘದ ಪ್ರತೀ ಕಾರ್ಯಕ್ರಮಗಳಲ್ಲಿ ಸಂಬಂಧಪಟ್ಟ ಎಲ್ಲರೂ ಭಾಗವಹಿಸಬೇಕು, ಆಗ ಸಂಘ ಹಾಗೂ ಸಂಘಟನೆ ಬಲವಾಗುತ್ತದೆ” ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಡ್ವೆಂಚರ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಅಮೃತ್ ರೈ ಯು.ಮಾತನಾಡಿ,”ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕಠಿಣ ಪರಿಶ್ರಮ ಮತ್ತು ಸರಿಯಾದ ಮಾರ್ಗದರ್ಶನ ಅತ್ಯಗತ್ಯ. ನಮ್ಮ ಸಂಸ್ಥೆಯು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಸದಾ ಮುಂಚೂಣಿಯಲ್ಲಿದೆ. ನಿವೃತ್ತ ಪ್ರಾಚಾರ್ಯರ ಸೇವೆ ಸಮಾಜಕ್ಕೆ ಮಾದರಿಯಾಗಿದ್ದು, ಅವರ ಮಾರ್ಗದರ್ಶನ ಯುವ ಪೀಳಿಗೆಗೆ ಸದಾ ಸ್ಪೂರ್ತಿದಾಯಕವಾಗಿದೆ” ಎಂದರು.

ಈ ಸಂದರ್ಭ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಯಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ರಾಜ್ಯ ಮಟ್ಟದಲ್ಲಿ ರಾಂಕ್ ಪಡೆದ ವಿದ್ಯಾರ್ಥಿಗಳನ್ನು ಧನ ಸಹಾಯ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಹಾಗೂ ನಿವೃತ್ತ ಪ್ರಾಚಾರ್ಯರನ್ನು ಸನ್ಮಾನಿಸಲಾಯಿತು.

ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಂಟಿ ಕಾರ್ಯದರ್ಶಿ ವಿಠಲ ಅಬೂರ, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ದ.ಕ. ಜಿಲ್ಲಾ ಘಟಕ ಅಧ್ಯಕ್ಷ ಹರಿಪ್ರಕಾಶ್ ಬೈಲಾಡಿ, ಎಡುವೆಂಚರ್ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ರಕ್ಷಿತಾ ಅಮೃತ್ ರೈ, ಎಡುವೆಂಚರ್ ಪ.ಪೂ. ಕಾಲೇಜಿನ ಪ್ರಾಚಾರ್ಯರ ಮಹೇಶ್ ಕೆ.ಎನ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷರಾದ ಡಾ. ಸರೋಜಿನಿ, ಪ್ರೊ.ಜಾರ್ಜ್, ಖಜಾಂಜಿ ಎ.ಎಸ್ ಆದರ್ಶ ಉಪಸ್ಥಿತರಿದ್ದರು.
ಪೊಂಪೈ ಪಿ.ಯು ಕಾಲೇಜಿನ ಪ್ರಾಚಾರ್ಯರ ಡೆಸ್ಮಂಡ್ ಎಡ್ವರ್ಡ್ ಡಿ ಮೆಲ್ಲೊ ವಂದಿಸಿದರು. ಪಾಂಡ್ಯರಾಜ ಬಲ್ಲಾಳ್ ಪಿಯು ಕಾಲೇಜಿನ ಪ್ರಾಂಶುಪಾಲೆ ಶರ್ಮಿಳಾ ಮುಖೇಶ್ ರಾವ್ ಹಾಗೂ ಎಡ್ವೆಂಚರ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಸತೀಶ್ ಆಚಾರ್ಯ ನಿರ್ವಹಿಸಿದರು.


