
ಬೆಂಗಳೂರು, ಆ.28: ಕೈಲಾಸ ಪರ್ವತ ಹಾಗೂ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಕರ್ನಾಟಕದ 23 ಮಂದಿ ಪ್ರವಾಸಿಗರು ಚೀನಾದ ದರ್ಚೆನ್ನಲ್ಲಿ ಸಿಲುಕಿಕೊಂಡಿದ್ದು, ಇದೀಗ ಸಾಗಾ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಆದರೆ ಸಾಗಾದಿಂದ ಸಮೀಪದ ವಿಮಾನ ನಿಲ್ದಾಣಕ್ಕೆ ರಸ್ತೆ ಮೂಲಕ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಪ್ರವಾಸಿಗರಿಗೆ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ವಿಮಾನದ ಮೂಲಕ ಸ್ಥಳಾಂತರಿಸಲು ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವಂತೆ ಡಾ. ಆರತಿ ಕೃಷ್ಣ ಅವರು ಚೀನಾದ ಬೀಜಿಂಗ್ನಲ್ಲಿರುವ ಭಾರತದ ರಾಯಭಾರಿ ವಿಕ್ರಮ್ ಕೆ. ದೊರೈಸ್ವಾಮಿ ಅವರಿಗೆ ಮನವಿ ಮಾಡಿದ್ದಾರೆ.
ಆ.26ರಂದು ಕೈಲಾಸ ಪರ್ವತ ಹಾಗೂ ಮಾನಸ ಸರೋವರಕ್ಕೆ ಭೇಟಿ ನೀಡಿದ್ದ ಕರ್ನಾಟಕದ 23 ಮಂದಿ ಪ್ರವಾಸಿಗರು ದರ್ಚೆನ್ನಲ್ಲಿ ಸಿಲುಕಿಕೊಂಡಿದ್ದರು. ಪ್ರವಾಸ ಆಯೋಜಕರು ಅವರನ್ನು ಸಾಗಾಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅಲ್ಲಿಂದ ಸಮೀಪದ ವಿಮಾನ ನಿಲ್ದಾಣಕ್ಕೆ ರಸ್ತೆ ಸಂಪರ್ಕದ ಮೂಲಕ ತೆರಳಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ.
ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತುರ್ತು ಕ್ರಮ ಕೈಗೊಂಡು ಅವರನ್ನು ವಿಮಾನದ ಮೂಲಕ ಸ್ಥಳಾಂತರಿಸಲು ಅಥವಾ ಯಾವುದೇ ಪರ್ಯಾಯ ಮಾರ್ಗದ ಮೂಲಕ ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ಯಲು ಅಗತ್ಯ ನೆರವು ನೀಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಪ್ರವಾಸಿಗರೊಂದಿಗೆ ಸಂಪರ್ಕ ಸಾಧಿಸಲು ಹೇಮಂತ್ ಅವರನ್ನು ಸಂಪರ್ಕಿಸಬಹುದೆಂದು ಪತ್ರದಲ್ಲಿ ತಿಳಿಸಲಾಗಿದೆ.
ಈ 23 ಮಂದಿ ಕರ್ನಾಟಕದ ಪ್ರವಾಸಿಗರ ಸುರಕ್ಷಿತ ವಾಪಸಾತಿಗಾಗಿ ಭಾರತೀಯ ರಾಯಭಾರ ಕಚೇರಿ ಅಗತ್ಯ ಕ್ರಮ ಕೈಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.


