ಬಂಟ್ವಾಳ (ಜು-16): ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ನಡೆದಿರುವ ಯುವತಿಯ ಬರ್ಬರ ಹತ್ಯೆ ಪ್ರಕರಣವನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ತೀವ್ರವಾಗಿ ಖಂಡಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಶಿನೀರ ಅವರು, ಬಂಟ್ವಾಳ ಪರಿಸರದಲ್ಲಿ ಒಂದೇ ತಿಂಗಳೊಳಗೆ ಎರಡನೇ ಬಾರಿ ಇಂತಹ ಭೀಕರ ಘಟನೆ ಸಂಭವಿಸಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲೇ ಮಹಿಳೆಯ ಮೇಲೆ ಇಂತಹ ಕ್ರೂರ ಕೃತ್ಯ ಎಸಗಿರುವುದು ರಾಜ್ಯದ ಕಾನೂನು-ಸುವ್ಯವಸ್ಥೆ ಹಾಗೂ ಮಹಿಳೆಯರ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮಹಿಳೆಯರು ಭಯಮುಕ್ತವಾಗಿ ಸಂಚರಿಸುವ ವಾತಾವರಣವನ್ನು ನಿರ್ಮಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯ ಸರ್ಕಾರವು ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಹಿಳೆಯರ ವಿರುದ್ಧ ನಡೆಯುತ್ತಿರುವ ಅಪರಾಧಗಳನ್ನು ತಡೆಗಟ್ಟಲು ಕಠಿಣ ಕಾನೂನು ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದರ ಜೊತೆಗೆ, ಭದ್ರತಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು. ಈ ಪ್ರಕರಣದ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಿ, ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇಂತಹ ಅಮಾನವೀಯ ಹಾಗೂ ಹೇಯ ಕೃತ್ಯಗಳು ಮರುಕಳಿಸದಂತೆ ಸರ್ಕಾರ ಪರಿಣಾಮಕಾರಿ ಮತ್ತು ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹಿಸಿದೆ.


