ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಅವರಿಗೆ ದೆಹಲಿ ಹೈಕೋರ್ಟ್ ನಲ್ಲಿ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬಿ.ಸಿ. ರೋಡ್ ಕೈಕಂಬದಲ್ಲಿರುವ ಪಕ್ಷದ ಕಚೇರಿ ಮುಂಭಾಗದಲ್ಲಿ ವಿಜಯೋತ್ಸವ ಸಂಭ್ರಮಾಚರಣೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಅವರು, “ದೇಶದ ಧ್ವನಿಯಿಲ್ಲದ ಸಮುದಾಯಗಳಿಗೆ ದೊರೆತ ಕಾನೂನಿನ ವಿಜಯ ಇದಾಗಿದೆ. ನ್ಯಾಯಾಂಗದ ಮೇಲೆ ಜನರ ವಿಶ್ವಾಸವನ್ನು ಬಲಪಡಿಸುವ ತೀರ್ಪು ಇದಾಗಿದ್ದು, ಸತ್ಯ ಮತ್ತು ನ್ಯಾಯ ಅಂತಿಮವಾಗಿ ಗೆಲ್ಲುತ್ತವೆ ಎಂಬುದನ್ನು ಈ ತೀರ್ಪು ಮತ್ತೊಮ್ಮೆ ಸಾಬೀತುಪಡಿಸಿದೆ. ಸಮಾಜದ ಹಕ್ಕುಗಳಿಗಾಗಿ ಹೋರಾಡುವ ನಾಯಕತ್ವವನ್ನು ಮೌನಗೊಳಿಸಲು ನಡೆದ ಎಲ್ಲಾ ಪ್ರಯತ್ನಗಳ ನಡುವೆಯೂ ನ್ಯಾಯ ದೊರೆತಿರುವುದು ಪ್ರಜಾಸತ್ತಾತ್ಮಕ ಮೌಲ್ಯಗಳ ಜಯವಾಗಿದೆ,” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಾಹುಲ್ ಹಮೀದ್ ಎಸ್ಎಚ್ ವಹಿಸಿದ್ದರು. ಪಕ್ಷದ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಹಾಗೂ ಅಭಿಮಾನಿಗಳು ಭಾಗವಹಿಸಿ ಸಿಹಿ ತಿಂಡಿ ಹಂಚಿಕೊಂಡು ಸಂಭ್ರಮಾಚರಣೆ ನಡೆಸಿದರು. ಕಾರ್ಯಕ್ರಮವನ್ನು ಅಕ್ಬರ್ ಅಲಿ ಪೊನ್ನೋಡಿ ನಿರೂಪಿಸಿ, ಧನ್ಯವಾದ ಅರ್ಪಿಸಿದರು.



