ಉಳ್ಳಾಲ: ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಒದಗಿಸುವ 106ನೇ ಸಂವಿಧಾನ ತಿದ್ದುಪಡಿ ಕಾಯಿದೆ 2023ರಲ್ಲಿ ಅಂಗೀಕರಿಸಿರುವುದು ದೇಶದ ರಾಜಕೀಯ ಇತಿಹಾಸದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಅದರ ಜಾರಿಗೆ ಮೊದಲು ಡಿಲಿಮಿಟೇಶನ್ ಮತ್ತು ಜನಗಣತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದೇ ಈ ಕಾಯ್ದೆಯನ್ನು ಜಾರಿಗೊಳಿಸಿರುವ ಬಗ್ಗೆ ಕಾಂಗ್ರೆಸ್ ಪಕ್ಷ ವಿರೋಧ ವ್ಯಕ್ತ ಪಡಿಸಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಸುರೇಖಾ ಚಂದ್ರಹಾಸ್ ತಿಳಿಸಿದರು.

ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದೀರ್ಘಕಾಲದಿಂದ ನಿರೀಕ್ಷಿತವಾಗಿದ್ದ ಮಹಿಳಾ ಮೀಸಲಾತಿ ಮಸೂದೆಗೆ ನಾವು ವಿರೋಧಿಗಳಲ್ಲ. ಆದರೆ, ಅಗತ್ಯ ಪ್ರಕ್ರಿಯೆಗಳನ್ನು ಕಡೆಗಣಿಸಿ ತುರ್ತು ಜಾರಿಗೆ ತರಲು ಮಾಡುವ ಪ್ರಯತ್ನಗಳಿಗೆ ನಾವು ವಿರೋಧಿಸುತ್ತೇವೆ,” ಎಂದು ಹೇಳಿದರು.
ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಅಂಗೀಕರಿಸಲ್ಪಟ್ಟ ಈ ಕಾಯ್ದೆ 2026ರೊಳಗೆ ಜಾರಿಗೆ ಬರಲಿದೆ ಎಂಬ ನಿರೀಕ್ಷೆ ಇದ್ದರೂ, ಸೂಕ್ತ ವಿಧಾನಗಳನ್ನು ಅನುಸರಿಸುವುದು ಅನಿವಾರ್ಯ. “ಕಾಂಗ್ರೆಸ್ ಪಕ್ಷ ಯಾವತ್ತೂ ಮಹಿಳಾ ವಿರೋಧಿ ಅಲ್ಲ. ದೇಶಕ್ಕೆ ಪ್ರಥಮ ಮಹಿಳಾ ಪ್ರಧಾನಿಯನ್ನು ನೀಡಿದ ಹೆಮ್ಮೆ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಇದೆ. ಮಹಿಳಾ ಸಬಲೀಕರಣದಲ್ಲಿ ನಾವು ಸದಾ ಮುಂಚೂಣಿಯಲ್ಲಿದ್ದೇವೆ” ಎಂದರು .
ಬಿಲ್ಕಿಸ್ ಬಾನು ಪ್ರಕರಣದಲ್ಲಿ ಅಪರಾಧಿಗಳಿಗೆ ಬಿಡುಗಡೆ ನೀಡಿದ ಬಿಜೆಪಿ ಸರ್ಕಾರದ ಕ್ರಮವನ್ನು ನಾವು ಟೀಕಿಸುತ್ತೇವೆ ಹಾಗೂ ಮಹಿಳಾ ಕುಸ್ತಿಪಟುಗಳ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರ ತೋರಿದ ನಿರ್ಲಕ್ಷ್ಯವನ್ನೂ ಖಂಡಿಸುತ್ತೇವೆ. ಮಹಿಳಾ ಮೀಸಲಾತಿ ಕಾಯ್ದೆ ಶೀಘ್ರ ಜಾರಿಗೆ ಬರಬೇಕು ಎಂಬುದು ನಮ್ಮ ಒತ್ತಾಯವಾಗಿದ್ದು, ಮುಂದಿನ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪವಾದರೆ ಖಂಡಿತ ಯಶಸ್ಸು ಸಿಗಲಿದೆ ಎಂಬ ವಿಶ್ವಾಸ ಇದೆ ಎಂದ ಅವರು ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ಚುನಾವಣಾ ಸಂದರ್ಭದಲ್ಲೇ ಇದನ್ನು ತುರ್ತಾಗಿ ಜಾರಿಗೆ ತರಬೇಕಾದ ಅಗತ್ಯವೇನು ಎಂದು ಅವರು ಈ ಸಂದರ್ಭದಲ್ಲಿ ಪ್ರಶ್ನಿಸಿದರು.
ಉಳ್ಳಾಲ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ ಕೋಟೆಕಾರ್, ಉಳ್ಳಾಲ ನಗರ ಮಹಿಳಾ ಕಾಂಗ್ರೆಸ್ನ ಅಮಿತಾ ಉಳ್ಳಾಲ ಉಪಸ್ಥಿತರಿದ್ದರು.


